ಉಡುಪಿ: ಉಡುಪಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡಿರುವ ಲಯನ್ಸ್ ಜಿಲ್ಲೆ 317 ಸಿ ಇದರ ಪ್ರಾಂತ್ಯ 1ರ ಪ್ರಾಂತೀಯ ಸಮ್ಮೇಳನವನ್ನು ಇದೇ ಜ. 21ರಂದು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಆಯೋಜನಾ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4ಗಂಟೆಗೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿವಿಧ ಸೇವಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಶ್ರೀನಿವಾಸ್ ಅವರು ಕೊಡಮಾಡಿದ ಹತ್ತು ಕಂಪ್ಯೂಟರನ್ನು ವಿವಿಧ ಶಾಲೆಗಳಿಗೆ ನೀಡಲಾಗುವುದು. ವಿಶೇಷ ಚೇತನರಿಗೆ ಗಾಲಿ ಕುರ್ಚಿ, ವಿದ್ಯಾ ಸಂಸ್ಥೆಗೆ ಸಹಾಯಧನ ಅನಾರೋಗ್ಯ ಪೀಡಿತರಿಗೆ ಧನಸಹಾಯ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷೆ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ಮಾಜಿ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ, ಉಮೇಶ್ ನಾಯ್ಕ್, ಪ್ರಶಾಂತ್ ಭಂಡಾರಿ ಉಪಸ್ಥಿತರಿದ್ದರು.