ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಜೂನ್ 17ಕ್ಕೆ ಮುಂದಿನ ವಿಚಾರಣೆಗೆ ಹಾಜರಾಗಲು ತಿಳಿಸಿದ ಕೋರ್ಟ್ ಮುಂದಿನ ಆದೇಶದವರೆಗೆ ಬಂಧಿಸದಂತೆ ಹೇಳಿದೆ.
ಮುಂದಿನ ವಿಚಾರಣೆವರೆಗೂ ಒತ್ತಾಯದ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಆದೇಶಿಸಿದೆ. ಮಾಜಿ ಸಿಎಂ ಆಗಿದ್ದು, ಬಿಎಸ್ವೈ ಜೀವನದ ಸಂಧ್ಯಾಕಾಲದಲ್ಲಿ ಇದ್ದಾರೆ. ಸ್ವಾಭಾವಿಕವಾಗಿ ಆರೋಗ್ಯದ ಅಡಚಣೆ ಇರುತ್ತವೆ. ಓಡಿ ಹೋಗುವ ವ್ಯಕ್ತಿ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್, ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ನೋಟಿಸ್ ನೀಡಿದೆ.
ಬಂಧನದ ಭೀತಿ ಎದುರಿಸುತ್ತಿದ್ದ ಬಿಎಸ್ವೈ ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್ಗೆ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದರೆ, ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದ್ದರು.