Friday, September 20, 2024

ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸುವ ಬೋಟ್ ಮಾಲೀಕರಿಗೆ ಎಚ್ಚರಿಕೆ ನೀಡಿ: ಜಿಲ್ಲಾಧಿಕಾರಿ

Must read

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸಲಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಹೆಣ್ಣು ಮಕ್ಕಳು ಕಂಡು ಬರುತ್ತಿದ್ದಾರೆ. ಈ ಬಗ್ಗೆ ಬೋಟ್ ಮಾಲೀಕರಿಗೆ ಮೊದಲು ಮಾಹಿತಿ ನೀಡಿ, ಮಕ್ಕಳನ್ನು ನಿಯೋಜಿಸದಂತೆ ಎಚ್ಚರಿಕೆ ನೀಡಬೇಕು. ಅಲ್ಲದೆ, ಅಧಿಕಾರಿಗಳು ಆಗಾಗ ದಿಢೀರ್ ಕಾರ್ಯಾಚರಣೆ ನಡೆಸಿ, ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದ್ರು.

ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ನೊಂದ ಮಹಿಳೆಯರಿಗೆ ನೆರವು ನೀಡಲು ಜಿಲ್ಲೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಅನ್ನು ಆರಂಭಿಸಲಾಗಿದ್ದು, ಸಂಕಷ್ಟದಲಿರುವ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ ಅವರು, 2022 ರ ಅಕ್ಟೋಬರ್ ನಿಂದ ಈವರೆಗೆ ಮಹಿಳೆಯರ ಮೇಲಿನ ದೌರ್ಜನ್ಯದ ಒಟ್ಟು 233 ಪ್ರಕರಣಗಳು ದಾಖಲಾಗಿದ್ದು, 181 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಬಾಕಿ ಉಳಿದ ಇತರೆ ಪ್ರಕರಣವನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡುವಂತೆ ಅವರು ತಿಳಿಸಿದರು.

ಶಾಲೆ ಬಿಟ್ಟ ಮಕ್ಕಳು ಹಾಗೂ ಬಾಲ ಕಾರ್ಮಿಕರು ಬಾಲ್ಯ ವಿವಾಹಕ್ಕೆ ಒಳಪಡುವ ಸಾಧ್ಯತೆ ಇದ್ದು, ಅವರುಗಳಿಗೆ ಆಪ್ತ ಸಮಾಲೋಚನೆ ನಡೆಸಿ, ಶಿಕ್ಷಣದ ಮಹತ್ವ ಕುರಿತು ಅರಿವು ಮೂಡಿಸಿ ಅವರನ್ನು ಮರಳಿ ಶಾಲೆಗೆ ಕರೆತರಲು ಮನವೊಲಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಡಿಮೆ ಇದೆ ಎಂದು ನಿರ್ಲಕ್ಷ್ಯ ವಹಿಸದೆ, ಗ್ರಾಮ ಪಂಚಾಯತಿಗಳು ಆಗಾಗ ಸಭೆಯನ್ನು ನಡೆಸಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿ, ಬಾಲ್ಯ ವಿವಾಹ ತಡೆಗಟ್ಟಲು ಪ್ರಯತ್ನಿಸಬೇಕು ಎಂದರು.
ದೇವಸ್ಥಾನಗಳಲ್ಲಿ ಮದುವೆಗಳನ್ನು ಏರ್ಪಡಿಸುವ ಸಂದರ್ಭದಲ್ಲಿ ಅನುಮಾನ ಬಂದಲ್ಲಿ ಅರ್ಚಕರುಗಳು ಜನನ ಪ್ರಮಾಣ ಪತ್ರವನ್ನು ಪರಿಶೀಲಿಸಿ ಮದುವೆ ನಡೆಸಬೇಕು. ಇಲ್ಲವಾದಲ್ಲಿ ಬಾಲ್ಯ ವಿವಾಹ ನಡೆಸಿದ ದೇವಸ್ಥಾನದ ಅರ್ಚಕರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಕುರಿತು ನಿಗಾ ವಹಿಸಬೇಕು. ಇಲ್ಲವಾದಲ್ಲಿ ಅವರುಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಕೌಟುAಬಿಕ ಹಿಂಸೆಗೆ ಸಂಬAಧಿಸಿದAತೆ, ಜಿಲ್ಲೆಯಲ್ಲಿ 2022 ರ ಅಕ್ಟೋಬರ್‌ನಿಂದ ಈವರೆಗೆ 73 ಪ್ರಕರಣಗಳು ದಾಖಲಾಗಿದ್ದು, 49 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 24 ಪ್ರಕರಣಗಳು ಬಾಕಿ ಇವೆ. ಉಡುಪಿ ತಾಲೂಕಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಈ ಕುರಿತು ಗಮನಹರಿಸುವಂತೆ ಹಾಗೂ ಕಾಯ್ದೆಯ ಕುರಿತು ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಗಾರ ಏರ್ಪಡಿಸುವಂತೆ ತಿಳಿಸಿದರು.

ಮಾತೃ ವಂದನಾ ಯೋಜನೆಯ ಮಾಹಿತಿ ಕೊರತೆಯಿಂದ ಇದರ ಲಾಭದಿಂದ ಗರ್ಭಿಣಿ ಮಹಿಳೆಯರು ವಂಚಿತರಾಗುತ್ತಿದ್ದಾರೆ. ಅಂಗನವಾಡಿಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡಿ, ಅವರುಗಳನ್ನು ಈ ಯೋಜನೆಯ ಫಲಾನುಭವಿಗಳನ್ನಾಗಿಸಬೇಕು ಎಂದರು.

ಪೋಕ್ಸೋ ಕಾಯ್ದೆಯಡಿ ಪ್ರಸಕ್ತ ಸಾಲಿನಲ್ಲಿ ಒಟ್ಟು 38 ಪ್ರಕರಣಗಳು ದಾಖಲಾಗಿದ್ದು, 23 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 10 ಪ್ರಕರಣಗಳು ತನಿಖೆಯ ಹಂತದಲ್ಲಿ ಇವೆ ಎಂದ ಅವರು, ಶಾಲೆಗಳಲ್ಲಿ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕಟಪಾಡಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ನಿರ್ಮಾಣ ಕಾಮಗಾರಿಯು ಅಪೂರ್ಣಗೊಂಡಿದ್ದು, ಉಸ್ತುವಾರಿ ಸಚಿವರ ಸೂಚನೆಯಂತೆ ಆದ್ಯತೆಯ ಮೇಲೆ ಕೈಗೊಂಡು ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಡಿವೈಎಸ್‌ಪಿ ದಿನಕರ್ ಪಿ.ಕೆ, ವಿವಿಧ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸಂಸ್ಥೆಯ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here