Saturday, April 18, 2026

ಬ್ರಹ್ಮಾವರ: ಅ. 26, 27ಕ್ಕೆ ‘ಕೃಷಿ ಮೇಳ-2024’

Must read

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ. ಗುರುಮೂರ್ತಿ, ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಶ್ಯಂತ ಕುಮಾರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಮೊದಲ ದಿನ ಮಧ್ಯಾಹ್ನ 2 ಗಂಟೆಯಿಂದ ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಎರಡನೇ ದಿನ ಬೆಳಿಗ್ಗೆ 10ಗಂಟೆಗೆ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು ಮಧ್ಯಾಹ್ನ 2 ಗಂಟೆಗೆ “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಕೃಷಿ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳಿದ್ದು, ಅದರಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ. ಕೆ.ವಿ. ಸುಧೀರ್ ಕಾಮತ್ ಮಾತನಾಡಿ, ಈ ವರ್ಷದ ಕೃಷಿಮೇಳದಲ್ಲಿ ಕೃಷಿಕರಿಗಾಗಿ ನಮ್ಮ ಕೇಂದ್ರದಿಂದ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆ ಮಾಡಲಾಗಿರುವ ಭತ್ತದ ತಳಿಗಳಾದ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಸಹ್ಯಾದ್ರಿ ಸಪ್ತಮಿ, ಕಜೆ 25-9 ಹಾಗೂ ಕೇಂದ್ರದಲ್ಲಿ ಪ್ರಸ್ತುತ ಪ್ರಯೋಗಗಳಲ್ಲಿ ತೊಡಗಿಸಲಾಗಿರುವ ಇತರ ಭತ್ತದ ತಳಿಗಳನ್ನು ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿರುತ್ತದೆ. ಇದೇ ಸಂದರ್ಭದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದಿಂದ ಬಿಡುಗಡೆ ಮಾಡಿರುವಂತಹ ಕೃಷಿ ಯಂತ್ರೋಪಕರಣಗಳಾದ ಸುಧಾರಿತ ಕೊನೋ ವೀಡರ್, ಛತ್ತದಲ್ಲಿ ಕಳೆ ತೆಗೆಯುವ ಯಂತ್ರ, ಪವರ್ ಟಿಲ್ಲರ್ ಚಾಲಿತ ಮಣ್ಣು ದಬ್ಬುವ ಯಂತ್ರ ಹಾಗೂ ಕಾಡು ಪ್ರಾಣಿಗಳ ಹಾವಳಿ ಕುರಿತು ಮಾಲಿಕರನ್ನು ಎಚ್ಚರಿಸುವ ಸ್ವಯಂ ಚಾಲಿತ ವ್ಯವಸ್ಥೆ ಮುಂತಾದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯ ಮಾಡಿಕೊಡಲಾಗುವುದು. ಈ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ಡೋನ್ ಬಳಕೆಯ ಪ್ರಾತ್ಯಕ್ಷಿಕೆ, ಸಿಓ-4, 5 ಮತ್ತು ಸಿಓಎಫ್‌ಎಸ್.-29, 31 ಹಾಗೂ ಸೂಪರ್ ನೇಪಿಯರ್ ಮೇವಿನ ಬೆಳೆಗಳ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಕಸಿಕಟ್ಟುವಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆಗಳ ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು, ಅಲಂಕಾರಿಕೆ ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಆಕರ್ಷಕ ಕೃಷಿ ವಸ್ತು ಪ್ರದರ್ಶನಗಳೂ ಇರುತ್ತವೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎಂ. ಶಂಕರ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷಣ್ ಇದ್ದರು.

spot_img

More articles

LEAVE A REPLY

Please enter your comment!
Please enter your name here