ಉಡುಪಿ: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ.
ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ ಸಿ.ಸಿ. ನಂ.76/2023ರಂತೆ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ವೈಗರ್ ಅಪಾರ್ಟ್ಮೆಂಟ್ನ ಮನೆ ಸಂಖ್ಯೆ 304 ಅನ್ನು ದಾವೆದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು. ಇಲ್ಲವೇ ಪರ್ಯಾಯವಾಗಿ ₹27.20 ಲಕ್ಷ ಮೊತ್ತವನ್ನು ವಾರ್ಷಿಕ ಶೇ.9ರ ಬಡ್ಡಿದರದೊಂದಿಗೆ ಪಾವತಿಸಬೇಕು ಎಂದು ಆದೇಶಿಸಿತ್ತು.
ಆದರೆ ಆಯೋಗದ ಆದೇಶವನ್ನು ಅಮೃತ್ ಶೆಣೈ ಪಾಲಿಸದ ಹಿನ್ನೆಲೆಯಲ್ಲಿ ಸಂತೋಷ್ ಪೈ ಅವರು ಎಕ್ಸಿಕ್ಯೂಷನ್ ಕೇಸ್ ನಂ.31/2024 ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ–2019ರ ಸೆಕ್ಷನ್ 72ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿರುವುದಾಗಿ ಆಯೋಗ ಅಭಿಪ್ರಾಯಪಟ್ಟಿತು.
ಜೂನ್ 24ರಂದು ತೀರ್ಪು ನೀಡಿದ ಆಯೋಗವು ಅಮೃತ್ ಶೆಣೈ ಅವರಿಗೆ ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿತು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿತು.
ಇದೇ ವೇಳೆ ಆರೋಪಿಯನ್ನು ಆಯೋಗದ ಮುಂದೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ಅದರಂತೆ ಗುರುವಾರ ಅಮೃತ್ ಶೆಣೈ ಅವರನ್ನು ಆಯೋಗದ ಮುಂದೆ ಹಾಜರುಪಡಿಸಲಾಯಿತು. ಬಳಿಕ ಆಯೋಗವು ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಹಿರಿಯಡ್ಕ ಕಾರಾಗೃಹಕ್ಕೆ ರವಾನಿಸಲಾಗಿದೆ.
ಗ್ರಾಹಕ ಆಯೋಗದ ಆದೇಶ ಉಲ್ಲಂಘನೆ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ

