ಉಡುಪಿ: ಬಿಪಿಎಲ್ ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಬಿಪಿಎಲ್ ಪಡಿತರ ಚೀಟಿಗೆ ಪ್ರಸ್ತುತ ಅನ್ವಯವಾಗುತ್ತಿರುವ ₹1.20 ಲಕ್ಷ ವಾರ್ಷಿಕ ಆದಾಯ ಮಿತಿಯನ್ನು 2017ರಲ್ಲಿ ನಿಗದಿಪಡಿಸಲಾಗಿತ್ತು. ಕಳೆದ ಒಂಬತ್ತು ವರ್ಷಗಳಲ್ಲಿ ದಿನಬಳಕೆಯ ವಸ್ತುಗಳ ಬೆಲೆ ಸೇರಿದಂತೆ ಜೀವನ ನಿರ್ವಹಣೆಯ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಆದಾಯ ಮಿತಿಯನ್ನು ಪರಿಷ್ಕರಿಸದ ಕಾರಣ ಬಡ ಹಾಗೂ ಕೆಳಮಧ್ಯಮ ವರ್ಗದ ಹಲವು ಕುಟುಂಬಗಳು ಬಿಪಿಎಲ್ ಸೌಲಭ್ಯದಿಂದ ವಂಚಿತರಾಗಿವೆ ಎಂದು ಅವರು ತಿಳಿಸಿದ್ದಾರೆ.
ಬಹುತೇಕ ಕುಟುಂಬಗಳ ಆದಾಯದಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿದ್ದರೂ, ಇಂದಿನ ಆರ್ಥಿಕ ಪರಿಸ್ಥಿತಿಯಲ್ಲಿ ₹1.20 ಲಕ್ಷದ ಆದಾಯ ಮಿತಿ ಪ್ರಾಯೋಗಿಕವಾಗಿಲ್ಲ. ಹೀಗಾಗಿ ನೈಜವಾಗಿ ಅರ್ಹರಾಗಿರುವ ಕುಟುಂಬಗಳಿಗೆ ಆಹಾರ ಭದ್ರತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ದೊರೆಯುವಂತೆ ಬಿಪಿಎಲ್ ಪಡಿತರ ಚೀಟಿಯ ವಾರ್ಷಿಕ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸಿ, ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಶಾಸಕ ಯಶ್ಪಾಲ್ ಸುವರ್ಣ ಮನವಿ
More articles

