ಉಡುಪಿ: ಕರಾವಳಿ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ‘ಆಯುರ್ವೇದ ನಾಳೆಗೆ | ಹಳ್ಳಿಯ ಮಡಿಲಲ್ಲಿ ಆರೋಗ್ಯ ಹಬ್ಬ’ ಧ್ಯೇಯವಾಕ್ಯದೊಂದಿಗೆ ‘ಚಿತ್ರಕೂಟ ಆಯುರ್ವೇದ ಹಬ್ಬ–2026’ ಅನ್ನು ಅಕ್ಟೋಬರ್ 4ರಂದು ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.
2010ರಿಂದ ಕಾರ್ಯನಿರ್ವಹಿಸುತ್ತಿರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಆಶ್ರಯದಲ್ಲಿ ನಡೆಯಲಿರುವ ಹಬ್ಬದಲ್ಲಿ ಯುವಜನತೆಯನ್ನು ಆಯುರ್ವೇದದತ್ತ ಸೆಳೆಯಲು ‘ಚಿತ್ರಕೂಟ ಜೆನ್ ಜೀ ಆಯುರ್ವೇದ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಇನ್ಸ್ಟಾಗ್ರಾಮ್ ರೀಲ್ಸ್ ಸ್ಪರ್ಧೆ ಆಯೋಜಿಸಲಾಗಿದ್ದು, ₹75 ಸಾವಿರ ಮೌಲ್ಯದ ಬಹುಮಾನಗಳನ್ನು ನೀಡಲಾಗುವುದು. ರೀಲ್ಸ್ ಕಳುಹಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಅಕ್ಟೋಬರ್ 4ರಂದು ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳು, ಯುವಜನತೆ ಮತ್ತು ವೈದ್ಯರ ನಡುವೆ ಮುಕ್ತ ವಿಚಾರ ಸಂಕಿರಣವೂ ನಡೆಯಲಿದೆ.
ಕುಟುಂಬ ಸಮೇತರಾಗಿ ಹಳ್ಳಿಯ ಬದುಕಿನ ಅನುಭವ ನೀಡುವ ಉದ್ದೇಶದಿಂದ ಉಚಿತ ನಾಡಿ ಹಾಗೂ ದೇಹಪ್ರಕೃತಿ ಪರೀಕ್ಷೆ, ಗಿಡಮೂಲಿಕೆಗಳ ಕಷಾಯ ಶಾಲೆ, 250ಕ್ಕೂ ಅಧಿಕ ಗಿಡಮೂಲಿಕೆಗಳ ಔಷಧ ವನ ನಡಿಗೆ, ಹಳ್ಳಿಯ ಆಟಗಳು, ಸಾಂಪ್ರದಾಯಿಕ ಮತ್ತು ಆರೋಗ್ಯ ಆಹಾರ ಮೇಳ–ಸಂತೆ ಹಾಗೂ ಪಂಚಕರ್ಮ ಚಿಕಿತ್ಸೆಗಳ ಪರಿಚಯವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ. 9187471578 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



